ಮಂಗಳೂರು: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಬಜಪೆಯ ರಶೀದ್ ಸೇರಿ 56 ಸಿಬ್ಬಂದಿ ವರ್ಗಾವಣೆ
ಮಂಗಳೂರು: ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್ – ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಲಪಡಿಸುವ ಯತ್ನವನ್ನು ರಾಜ್ಯ ಸರ್ಕಾರ ಮಾಡಿತ್ತು. ಇದೀಗ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳಿಂದ ಒಂದೇ ಕಡೆ ತಳ ಊರಿದ್ದ ಸಿಬ್ಬಂದಿಗಳ ಸ್ಥಳಾಂತರ ಮಾಡಲಾಗಿದೆ. ಕೆಲ ವಾರಗಳ ಹಿಂದೆ ಕರಾವಳಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಶೀದ್ ಶೇಕ್ ಕೂಡ ವರ್ಗಾವಣೆಯಾಗಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಂತಕರ ಜೊತೆ ಪೊಲೀಸ್ ರಶೀದ್ ಶಾಮೀಲಾಗಿದ್ದರು ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಇದೀಗ ರಶೀದ್ ಅವರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಸಿ.ಸಿ.ಬಿ, ಸೆನ್ ಸೇರಿದಂತೆ ಕಮಿಷನರೇಟ್ ಪ್ರದೇಶಕ್ಕೆ ಒಳಪಡುವ ಠಾಣೆಗಳ ಹಲವು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.




