ಮಂಗಳೂರು: ಹೆಬ್ಬಾವು ಮಾರಾಟ ಜಾಲ ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು: ಪಿಯುಸಿ ವಿದ್ಯಾರ್ಥಿ ಸಹಿತ ನಾಲ್ವರ ಬಂಧನ
ಮಂಗಳೂರು: ನಗರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹೆಬ್ಬಾವು ಮಾರಾಟ ಜಾಲ ಪತ್ತೆ ಹಚ್ಚಿದ್ದು, ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ವಿಹಾಲ್ ಶೆಟ್ಟಿ(18), ಇಬ್ರಾಹಿಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬಂದಿ ಮಹಮ್ಮದ್ ಮುಸ್ತಫಾ (22) ಹಾಗೂ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿ ಬಂಧಿತ ಆರೋಪಿಗಳು.
ಹಾವು ಖರೀದಿ ನೆಪದಲ್ಲಿ ವಿಹಾಲ್ ನನ್ನು ಸಂಪರ್ಕಿಸಿ ಅತನ ಮೂಲಕ ಉಳಿದವರನ್ನು ಬಂಧಿಸಲಾಗಿದೆ. ಇಬ್ರಾಹಿಂ ಸ್ಟೇಟ್ ಬ್ಯಾಂಕ್ ಬಳಿಯ ಸಾಕುಪ್ರಾಣಿ ಮಾರಾಟ ಅಂಗಡಿಯಲ್ಲಿ ಅಕ್ರಮವಾಗಿ ಹಾವು ಮಾರಾಟ ಮಾಡುತ್ತಿದ್ದ ಬಗ್ಗೆ ತಿಳಿಸು ಬಂದಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನುಸೂಚಿತ (ಶೆಡ್ಯೂಲ್ 1) ಭಾಗ ಸಿ ಪ್ರಾಣಿಯಾದ ಇಂಡಿಯನ್ ರಾಕ್ ಪೈಥಾನ್(ಹೆಬ್ಬಾವು) ಅನ್ನು ಆರೋಪಿಗಳು ಹೊರದೇಶದ ಅಂದರೆ ಬರ್ಮಿಸ್ ಬಾಲ್ ಪೈಥಾನ್ ಎಂದು ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.




