ಉಡುಪಿ: ಸರಕಾರಿ ವಸತಿ ಗೃಹದಲ್ಲಿ ಕಳವು: ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ
ಉಡುಪಿಯ ಮಿಶನ್ ಕಂಪೌಂಡಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಸರಕಾರಿ ವಸತಿ ಗೃಹದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಬಂಗಡ ಯಾನೆ ಬಾಂಗು ಯಾನೆ ರಮೇಶ್ ಜವಾನ್ ಸಿಂಗ್(37)ಮತ್ತು ಕಾಲಿಯಾ ಯಾನೆ ಕಾಲು(25) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನೊಬ್ಬ ಆರೋಪಿ ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಜುಲೈ 19ರಂದು ರಾತ್ರಿ ವಸತಿ ಗೃಹದಲ್ಲಿನ ನಾಲ್ಕು ಮನೆಗಳಿಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಮಾರ್ಗದರ್ಶನ ದಲ್ಲಿ ಹೆಚ್ಚುವರಿ ಎಸ್ಪಿ ಸುಧಾಕರ ನಾಯ್ಕ ಹಾಗೂ ಡಿವೈಎಸ್ಪಿ ಪ್ರಭು ಡಿ.ಟಿ. ನಿರ್ದೇಶನದಲ್ಲಿ ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ತನಿಖಾ ತಂಡವು ಉಡುಪಿ ಕರಾವಳಿ ಬೈಪಾಸ್ನ ರಾಷ್ಟ್ರೀಯ ಹೆದ್ದಾರಿ 66 ಬಳಿಯ ಸರ್ಕಸ್ ಗೌಂಡ್ನಲ್ಲಿನ ಸಿಸಿಟಿವಿ ದೃಶ್ಯಾವಳಿ ಗಳನ್ನು ಪರೀಶೀಲಿಸಿ ಮಾಹಿತಿ ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.




