ಧರ್ಮಸ್ಥಳ: ಶವಗಳನ್ನು ಹೂತು ಹಾಕಿದ ಪ್ರಕರಣ: ದೂರುದಾರನ ವಿಚಾರಣೆ ನಡೆಸಿದ SIT ತಂಡ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಆರಂಭಿಸಿದೆ. ಶನಿವಾರ ಮಂಗಳೂರಿನಲ್ಲಿ ದೂರುದಾರನ ತನಿಖೆ ನಡೆಸಲಾಗುತ್ತಿದೆ.
ಮಂಗಳೂರಿನ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ ಐಟಿಗಾಗಿ ಎರಡು ಕೊಠಡಿ ಮೀಸಲಿಡಲಾಗಿದೆ. ಶವಗಳನ್ನು ಹೂತಿಟ್ಟ ಬಗ್ಗೆ ದೂರು ನೀಡಿರುವ ವ್ಯಕ್ತಿ ಶನಿವಾರ (ಜು.26) ವಕೀಲರ ಜೊತೆಗೆ ಮಲ್ಲಿಕಟ್ಟೆಯ ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿ ಜಿತೇಂದ್ರ ದಯಾಮ ಅವರು ಜು.25ರಂದು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಅವರು ರಾತ್ರಿಯಾಗುತ್ತಲೇ ಪ್ರಕರಣದ ಕುರಿತಾದ ಮಾಹಿತಿ ಕಲೆಹಾಕುವ ಹಾಗೂ ಅದಕ್ಕೆ ಸಂಬಂಧಿಸಿದ ಕೇಸ್ ಫೈಲ್ ಪಡೆಯಲು ರಾತ್ರಿಯೇ ಆಗಮಿಸಿದ್ದಾರೆ. ಠಾಣೆಯ ಎಸ್.ಐ. ಸಮರ್ಥ್ ಆರ್.ಗಾಣಿಗೇರ್ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.




