ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: 15ಕ್ಕೂ ಅಧಿಕ ಸ್ಥಳಗಳನ್ನು ಗುರುತು ಮಾಡಿ, ಮಾರ್ಕ್ ಮಾಡಿದ ಅಧಿಕಾರಿಗಳು
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು.
ಸ್ಥಳ ಮಹಜರು ಪ್ರಕ್ರಿಯೆ ಇಂದು ರಾತ್ರಿಯವರೆಗೂ ಮುಂದುವರಿಯುವ ಸಾಧ್ಯತೆ ಇದ್ದು, ಎಸ್ಐಟಿ ತಂಡವು ಸ್ಥಳ ಮಹಜರು ನಡೆಸಿ 15ಕ್ಕೂ ಅಧಿಕ ಸ್ಥಳಗಳಲ್ಲಿ ಮಾರ್ಕ್ ಮಾಡಿದೆ ಎನ್ನಲಾಗಿದೆ.
ಅಲ್ಲದೆ, ನಾಳೆಯೂ ಇತರ ಸ್ಥಳಗಳಲ್ಲಿ ಸ್ಥಳ ಮಹಜರು ಕಾರ್ಯಾಚರಣೆಯನ್ನು ಮುಂದುವರಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.
ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದಿದ್ದರು.




