ಕಾಮಿಡಿ ಕಿಲಾಡಿಯ ಸಿದ್ದಿ ನೇಣು ಬಿಗಿದು ಆತ್ಮಹತ್ಯೆ
ಉತ್ತರ ಕನ್ನಡ: ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸುತ್ತಿದ್ದ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ದಿ (31) ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚಂದ್ರಶೇಖರ್, ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದರು.
ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಅವರು ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಂದಿರಲಿಲ್ಲ.
ಪತ್ನಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ.




