ಉಚ್ಚಿಲ ಪೇಟೆಯಲ್ಲಿ ಬೈಕ್ ಢಿಕ್ಕಿ: ಪಾದಚಾರಿ, ಬೈಕ್ ಸವಾರ ಮೃತ್ಯು
ಉಡುಪಿ: ಉಚ್ಚಿಲ ಪೇಟೆಯಲ್ಲಿ ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ, ಬೈಕ್ ಸವಾರ ಮೃತಪಟ್ಟಿದ್ದು, ಮಹಿಳೆ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಪಾದಚಾರಿ ಶಂಕರ ಶೆಟ್ಟಿ(65), ಬೈಕ್ ಸವಾರ ದರ್ಶನ್ ರಾಜ್(21) ಮೃತಪಟ್ಟಿದ್ದು, ನತಾಶಾ ಎಂಬಾಕೆ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಉಡುಪಿ ಏಕಮುಖ ರಸ್ತೆಯ ಬದಿಯಲ್ಲಿ ನಿಂತಿದ್ದ ಶಂಕರ ಶೆಟ್ಟಿ ಎಂಬವರಿಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಅವರನ್ನು ಉಡುಪಿಯ ಸರಕಾರಿ ಅಜ್ಜರಕಾಡು ಆಸ್ಪತ್ರೆಗೆ ಕೊಂಡೊಯ್ಯುವಾಗಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಹೆದ್ದಾರಿಗೆ ಎಸೆಯಲ್ಪಟ್ಟು ಬೈಕ್ ಸವಾರ ದರ್ಶನ್ರಾಜ್ ತೀವ್ರ ಗಾಯಗೊಂಡಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.




