ಧರ್ಮಸ್ಥಳ ಪ್ರಕರಣ: FSL ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ವಿಪಕ್ಷಗಳ ಆರೋಪ ಸಂಬಂಧ ಸೋಮವಾರ ಸದನದಲ್ಲಿ ಪ್ರತಿಕ್ರಿಯಿಸಿರುವ ಗೃಹಸಚಿವ ಪರಮೇಶ್ವರ್, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಇದುವರೆಗೆ ಒಂದು ಅಸ್ಥಿಪಂಜರ, ಮತ್ತೊಂದು ಕಡೆ ಮೂಳೆಗಳು ಸಿಕ್ಕಿವೆ. ಇದರ ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಆದ್ದರಿಂದ ವರದಿ ಲಭ್ಯವಾಗುವವರೆಗೆ ಉತ್ಖನನ ಕಾರ್ಯ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಿದರು.
ಇಷ್ಟರವರೆಗೆ ನಡೆದಿದ್ದು ಕೇವಲ ಉತ್ಖನನ ಕಾರ್ಯ ಮಾತ್ರ, ಇನ್ನೂ ತನಿಖೆ ಆರಂಭವಾಗಿಲ್ಲ. ದೂರುದಾರ ಮೊದಲು ತಂದ ತಲೆಬುರುಡೆಯನ್ನೂ ಎಫ್ಎಸ್ಎಲ್ ಗೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಮುಂದಿನ ತನಿಖೆ ನಡೆಯಲಿದೆ. ಸ್ಯಾಂಪಲ್ ಅನಾಲಿಸಿಸ್, ಡಿಎನ್ಎ ಸೇರಿ ಹಲವು ವಿಶ್ಲೇಷಣೆ ಆಗಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ದೂರುದಾರ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೆ ಅಗೆಯಲು ಸಾಧ್ಯವಿಲ್ಲ. ಮುಂದೆ ಅಗೆಯಬೇಕೊ ಬೇಡವೋ ಎಂದು ಎಸ್ಐಟಿ ತಿರ್ಮಾನ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ದೂರುದಾರನನ್ನು ಏಕೆ ಬಂಧಿಸಿಲ್ಲ ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದರು. ಕೇಂದ್ರ ಸರ್ಕಾರ ರಚಿಸಿರುವ ವಿಟ್ನೆಸ್ ಪ್ರೊಟೆಕ್ಷನ್ ಕಾಯ್ದೆ ಇದೆ. ದೂರುದಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೊರೆ ಹೋಗಿದ್ದ. ಜಿಲ್ಲಾ ಮ್ಯಾಜಿಸ್ಟ್ರೇಟ್ ಕಮಿಟಿ ದೂರುದಾರ ಮತ್ತು ಆತನ ಕುಟುಂಬಕ್ಕೆ ಭದ್ರತೆ ನೀಡುವಂತೆ ಆದೇಶ ನೀಡಿತ್ತು. ಹೀಗಾಗಿ ಬಂಧಿಸಲು ಆಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.




