ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಉಡುಪಿ ಮೂಲದ ಇಬ್ಬರು ಆರೋಪಿಗಳು ವಶಕ್ಕೆ
ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮೂಲದ ಸುಜನ್ ಮತ್ತು ಆದರ್ಶ್ ಬಂಧಿತರು. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 4ರಂದು ಭುವನ್ ಗೌಡ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಲಾಗಿತ್ತು. ಆರೋಪಿಗಳು ದರ್ಶನ್ ಅಭಿಮಾನಿಗಳಾಗಿದ್ದು, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು.
ಈ ಹಿಂದೆ ಇದೇ ಪ್ರಕರಣದಲ್ಲಿ ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ 7 ಮಂದಿಯನ್ನು ಬಂಧಿಸಲಾಗಿತ್ತು.
ಇತ್ತೀಚೆಗೆ ರಮ್ಯಾ ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆನ್ನುವ ನಿಟ್ಟಿನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಕೆಲ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲವಾಗಿ ಸಂದೇಶ ಹಾಗೂ ಕಮೆಂಟ್ ಮಾಡಿದ್ದರು.




