February 1, 2026

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಚಿನ್ನದ ವ್ಯಾಪಾರಿಯ ಅಪಹರಿಸಿ 350 ಗ್ರಾಂ ಚಿನ್ನ ದರೋಡೆ: ಐವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

0
IMG-20250819-WA0003.jpg

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಚಿನ್ನದ ವ್ಯಾಪಾರಿಯನ್ನ ಅಪಹರಿಸಿ 350 ಗ್ರಾಂ ಚಿನ್ನದ ಗಟ್ಟಿಯನ್ನು ಡಕಾಯಿತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಕುರಿತು ಮಾಹಿತಿ ನೀಡಿದ ಡಿಸಿಪಿ ಮಿಥುನ್ ಎಚ್.ಎನ್, ಆಗಸ್ಟ್ 13ರಂದು ಬೆಳಗ್ಗೆ ಕೇರಳದ ಕಾಞಂಗಾಡಿನಲ್ಲಿ ಜುವೆಲ್ಲರಿ ಉದ್ಯಮ ಹೊಂದಿರುವ ಭಾನುದಾಸ ಹರಿ ಥೋರಟ್ ಅವರು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಲಿ ಹೋಟೆಲ್ ಬಳಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು. ಆಗ ಇನ್ನೋವಾ ಕಾರಿನಲ್ಲಿ ಬಂದಿದ್ದ ಆರು ಮಂದಿ ಅಪರಿತರು, ತಮ್ಮನ್ನು ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿದ್ದು,‌ ಗದರಿಸಿ ಬಲವಂತದಿಂದ ಕಾರಿನಲ್ಲಿ ಕೂರಿಸಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಕರೆದೊಯ್ದು ಅಲ್ಲಿನ ಅಂತರವಳ್ಳಿ ಎಂಬಲ್ಲಿ ಥೋರಟ್ ಅವರನ್ನು ಇಳಿಸಿ ಅವರ ಕೈಯಲ್ಲಿದ್ದ ಸುಮಾರು 35 ಲಕ್ಷ ಮೌಲ್ಯದ 350 ಗ್ರಾಂ ತೂಕದ ಬಂಗಾರದ ಗಟ್ಟಿಗಳನ್ನು ದರೋಡೆ ಮಾಡಿದ್ದರು. ಈ ಬಗ್ಗೆ ಥೋರಟ್ ಅವರು ಕುಮಟಾ ಠಾಣೆಗೆ ದೂರು ನೀಡಿದ್ದರು.

ಕುಮಟಾ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ದಕ್ಷಿಣ ಠಾಣೆಯಲ್ಲಿ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 310(2), 137(2), 204 ಅಡಿ ಪ್ರಕರಣ ದಾಖಲಾಗಿತ್ತು.

ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಐದು ಮಂದಿ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತ್ತೆ ಮಾಡಲಾಗಿದೆ. ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದೇವೆ‌. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನ ಪಡಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ದೂರುದಾರ ಥೋರಟ್ ಅವರು ಕಾಞಂಗಾಡಿನಲ್ಲಿ ಜುವೆಲ್ಲರಿ ಹೊಂದಿದ್ದು, ವ್ಯವಹಾರ ನಿಮಿತ್ತ ಬಂಗಾರದ ಗಟ್ಟಿಯೊಂದಿಗೆ ಮಂಗಳೂರಿಗೆ ಬಂದಿದ್ದರು. ದರೋಡೆ ತಂಡದ ಪತ್ತೆಗಾಗಿ ಸಿಸಿಬಿ ಮತ್ತು ಕೇಂದ್ರ ವಿಭಾಗದ ತಂಡವನ್ನು ರಚಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!