ಬಂಟ್ವಾಳ: ತಲವಾರು ದಾಳಿ ನಡೆಸಿದ್ದಾರೆಂಬ ಸುಳ್ಳು ದೂರಿಗೆ ಆರೋಪಿಯ ಬಂಧನ
ಬಂಟ್ವಾಳ: ಜೂನ್ 11 ರಂದು ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 11 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ ತಲವಾರು ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸುಳ್ಳು ದೂರಿಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈತನ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 68/2025 ಕಲಂ 109, 324(4) ಜೊತೆ 3(5) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪೊಲೀಸರು ತನಿಖೆ ನಡೆಸಿದಾಗ ಇದೊಂದು ಸುಳ್ಳು ಪ್ರಕರಣವೆಂದು ಸಾಬೀತಾಗಿದ್ದು, ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ.




