March 13, 2026

ವಿಟ್ಲ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

0
IMG-20250906-WA0007.jpg

ವಿಟ್ಲ: ಪಿರ್ಯಾದಿದಾರರ ಮಾವನಿಗೆ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದಲ್ಲಿ 1 ಎಕ್ರೆ ಕೃಷಿ ಜಮೀನು ಇದ್ದು, ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮ ಪಂಚಾಯತ್‌ಗೆ ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ತಮ್ಮ ಜಾಗಕ್ಕೂ ಒಂದು ಕೊಳವೆ ಬಾವಿಯನ್ನು ಮಾಡಿಕೊಡಲು 2024 ರಲ್ಲಿ ಪಿಡಿಒ, ಗ್ರಾಮ ಪಂಚಾಯತ್, ಪೆರುವಾಯಿ ಗ್ರಾಮ ಪಂಚಾಯತ್‌ರವರಿಗೆ ಅರ್ಜಿ ಸಲ್ಲಿಸಿರುತ್ತಾರೆ. 2024 ನೇ ಸಾಲಿನಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ರವರು ಸತಾಯಿಸಿ ಕೊನೆಯಲ್ಲಿ ಪಿರ್ಯಾದಿದಾರರ ಮಾವನವರ ಹೆಸರನ್ನು ಕೊಳವೆ ಬಾವಿ ಲಿಸ್ಟ್‌ನಲ್ಲಿ ಸೇರಿಸಿರುವುದಿಲ್ಲ. ನಂತರ 2025 ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸರ್ಕಾರವು ಕೃಷಿಕರಿಗೆ ಕೊಳವೆ ಬಾವಿ ಮಾಡಿಕೊಡುತ್ತಿರುವ ಕುರಿತು ತಿಳಿದು ಬಂದಾಗ, ಪಿರ್ಯಾದಿದಾರರ ಮಾವನವರು ಪುನಃ ಮೇ 2025 ರಲ್ಲಿ ಕೊಳವೆ ಬಾವಿಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ. ನಂತರ ಫಿರ್ಯಾದಿದಾರರ ಪತ್ನಿ ಪೆರುವಾಯಿ ಗ್ರಾಮ ಪಂಚಾಯತ್ ಕಛೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರು ಕೂಡ ಸರಿಯಾಗಿ ಪ್ರತಿಕ್ರಿಯೆ ನೀಡಿರುವುದಿಲ್ಲ. ಫಿರ್ಯಾದಿದಾರರ ಮಾವನಿಗೆ ಸುಮಾರು 75 ವರ್ಷ ವಯಸ್ಸಾಗಿದ್ದು, ಅವರಿಗೆ ಅಸೌಖ್ಯ ಇದ್ದುದರಿಂದ ಫಿರ್ಯಾದಿದಾರರನ್ನು ಕರೆದು ಕೊಳವೆ ಬಾವಿ ಬಗ್ಗೆ ಪಂಚಾಯತ್‌ಗೆ ಹೋಗಿ ವಿಚಾರಿಸಿಕೊಂಡು ಬರುವಂತೆ ಪಿರ್ಯಾದಿದಾರರಿಗೆ ತಿಳಿಸಿದ್ದು, ಫಿರ್ಯಾದಿದಾರರು ದಿನಾಂಕ 02.09.2025 ರಂದು ಪೆರುವಾಯಿ ಗ್ರಾಮ ಪಂಚಾಯತ್‌ಗೆ ಹೋಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ನೆಫಿಸ್ಸಾ ರವರಲ್ಲಿ ತನ್ನ ಮಾವನವರ ಹೆಸರಿಗೆ ಕೊಳವೆ ಬಾವಿ ಮಂಜೂರು ಆಗಿದೆಯೇ ಎಂಬ ಬಗ್ಗೆ ವಿಚಾರಿಸಿದಾಗ ‘ನಿಮಗೆ ಬೋರ್‌ವೆಲ್ ಫ್ರೀ ಆಗುತ್ತದೆ, ಬೆಂಗಳೂರು ಆಫೀಸ್‌ಗೆ ಹತ್ತು ಸಾವಿರ ಕೊಡ್ಲಿಕ್ಕೆ ಇದೆ, ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ, ತಾನು ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ, ಹಣ ತಗೊಂಡು ಬನ್ನಿ, ನೀವು ಹಣ ಕೊಟ್ಟರೆ ಮಾತ್ರ ನಿಮಗೆ ಬೋರ್‌ವೆಲ್ ಪಾಸ್ ಮಾಡಿಸಿ ಕೊಡುತ್ತೇನೆ’ ಎಂದು ಹೇಳಿರುತ್ತಾರೆ. ಫಿರ್ಯಾದಿದಾರರು ತನ್ನಲ್ಲಿ ಅಷ್ಟು ಹಣ ಇಲ್ಲ ಎಂದು ಹೇಳಿ ವಾಪಾಸು ಬಂದಿರುತ್ತಾರೆ.

ನಂತರ ಪಿರ್ಯಾದಿದಾರರು ದಿನಾಂಕ 04.09.2025 ರಂದು ವಾಪಾಸ್ಸು ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ನೆಫಿಸಾ ರವರಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ಕೇಳಿಕೊಂಡಾಗ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನೆಫಿಸಾರವರು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ರೂ 10,000/- (ಹತ್ತು ಸಾವಿರ) ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಯಲ್ಲಿ ಶ್ರೀಮತಿ ನಫಿಸ್ಸಾ ಅಧ್ಯಕ್ಷರು ಪೆರುವಾಯಿ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕು ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಈ ದಿನ ದಿನಾಂಕ 06.09.2025 ರಂದು ಶ್ರೀಮತಿ ನಫೀಸಾ, ಅಧ್ಯಕ್ಷರು, ಪೆರುವಾಯಿ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕು ರವರು ಬಿಲ್ ಕಲೆಕ್ಟರ್ ಶ್ರೀ ವಿಲಿಯಂ ರವರಿಗೆ ಪಿರ್ಯಾದುದಾರರಿಂದ ರೂ. 10,000/- (ಹತ್ತು ಸಾವಿರ) ಲಂಚದ ಹಣವನ್ನು ಪಡೆದುಕೊಳ್ಳಲು ಸೂಚಿಸಿದಂತೆ ರೂ. 10,000/- (ಹತ್ತು ಸಾವಿರ) ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಶ್ರೀಮತಿ ನಫಿಸ್ಸಾ, ಅಧ್ಯಕ್ಷರು, ಪೆರುವಾಯಿ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕು ರವರನ್ನು ಮತ್ತು ಬಿಲ್ ಕಲೆಕ್ಟರ್ ವಿಲಿಯಂ ರವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ತನಿಖೆ ಮುಂದುವರಿದಿದೆ.

ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್. ಶ್ರೀ ರವಿ ಪವಾರ್ ರವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!