ಮಂಗಳೂರು: ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ: ಹಿಂದಿನಿಂದ ಬಂದ ಲಾರಿಯ ಅಡಿಗೆ ಬಿದ್ದ ಮಹಿಳೆ ಮೃತ್ಯು
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಉರುಳಿಬಿದ್ದ ಮಹಿಳೆಯೊಬ್ಬರು ಲಾರಿಯಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಗರ ಹೊರವಲಯದ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ.
ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ.
ಇವರು ತನ್ನ ದ್ವಿಚಕ್ರ ವಾಹನದಲ್ಲಿ ಕೂಳೂರು ಕಡೆಯಿಂದ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಉದ್ಯೋಗ ನಿಮಿತ್ತ ತೆರಳುತ್ತಿದ್ದ ವೇಳೆ ಈ ಅಫಘಾತ ಸಂಭವಿಸಿದೆ. ರಸ್ತೆಯಲ್ಲಿರುವ ಗುಂಡಿ ಕಾರಣ ಮಾಧವಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದಿದೆ ಎನ್ನಲಾಗಿದೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಾಟದ ಲಾರಿ ಅವರ ಹರಿದ ಪರಿಣಾಮ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.
ಮೃತದೇಹವನ್ನು ನಗರದ ಎ.ಜೆ. ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ದಾರುಣ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನು ಉಂಟುಮಾಡಿದ್ದು, ಮೂಲ್ಕಿಯಿಂದ ಪಂಪ್ವೆಲ್ಗೆ ಸಾಗುವ ಹೆದ್ದಾರಿಯ ದುಸ್ಥಿತಿಯ ಬಗ್ಗೆ ಗಂಭೀರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಮಾರ್ಗದಲ್ಲಿ ಹಲವಾರು ದೊಡ್ಡ ಗುಂಡಿಗಳು ಇರುವುದರಿಂದ ದಿನಕ್ಕೊಂದು ಅಪಘಾತ ಸಂಭವಿಸುವಂತಹ ಪರಿಸ್ಥಿತಿಯಿದೆ ಎಂದು ಸ್ಥಳೀಯರು ದೂರಿದ್ದಾರೆ.




