ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಹ್ವಾನ: ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಲೇಖಕಿ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾ ಮಾಡಿದೆ.
ಸೋಮವಾರ (ಸೆ.15) ಮುಖ್ಯ ನ್ಯಾ.ವಿಭು ಬಬ್ರು ಹಾಗೂ ನ್ಯಾ.ಸಿ.ಎಂ.ಜೋಷಿ ಅವರ ವಿಭಾಗೀಯ ನ್ಯಾಯಪೀಠವು ಪ್ರತಾಪ್ ಸಿಂಹ ಮತ್ತು ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾ ಮಾಡಿದೆ.
ಬಾನು ಮುಸ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದುನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.
ಸರ್ಕಾರದ ನಿರ್ಧಾರದಿಂದ ಅರ್ಜಿದಾರರ ಯಾವುದೇ ಕಾನೂನಾತ್ಮಕ ಅಥವಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.




