ಕುಂದಾಪುರ: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ನದಿತೀರದಲ್ಲಿ ಪತ್ತೆ
ಕುಂದಾಪುರ: ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ತು ನದಿತೀರದಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಕಾಲೇಜಿನಿಂದ ಹೊರಟಿದ್ದ ನಮೇಶ್, ಮನೆಗೆ ವಾಪಾಸಾಗದೆ ನಾಪತ್ತೆಯಾಗಿದ್ದ. ಬೈಕ್ ಹಾಗೂ ಕಾಲೇಜು ಬ್ಯಾಗ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿತೀರದಲ್ಲಿ ಪತ್ತೆಯಾಗಿತ್ತು. ಇದರಿಂದ ಆತ ನದಿಗೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು.
ಕುಂದಾಪುರ ನಗರ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರು ಎರಡು ದಿನಗಳ ಕಾಲ ತೀವ್ರ ಹುಡುಕಾಟ ನಡೆಸಿದರು. ಕೊನೆಗೂ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ತು ನದಿತೀರದಲ್ಲಿ ಮೃತದೇಹ ಪತ್ತೆಯಾಗಿದೆ.




