ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಬಂಟ್ವಾಳ ತಾ.ಪಂ.ನ ಹೆಸರಿನಲ್ಲಿ ಅನಧಿಕೃತ ಲೆಟರ್ ಹೆಡ್ ಬಳಸಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ದ.ಕ.ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಅಧೀನ ಸಿಬಂದಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿರುವುದಕ್ಕೆ ಬಂಟ್ವಾಳ ತಾ.ಪಂ.ಮಾಜಿ ಸದಸ್ಯನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಪ್ರಕರಣದ ಆರೋಪಿಯಾಗಿದ್ದು, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಚಿನ್ಕುಮಾರ್ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಮಾಜಿ ಸದಸ್ಯರು ತಮ್ಮ ಅಧಿಕಾರಾವಧಿ ಮುಗಿದರೂ ತಾ.ಪಂ.ನ ಲೆಟರ್ ಹೆಡ್ ಬಳಸಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾ.ಪಂ.ಸಿಬಂದಿಗೆ ಒತ್ತಡ ಹೇರದಂತೆ ಮನವಿ ಮಾಡಿದ್ದಾರೆ.
ಸಮೀಕ್ಷೆಗಾಗಿ ಜನರಿಗೆ ಒತ್ತಡ ಹೇರದಂತೆ ಹೈಕೋರ್ಟ್ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಯವರು ತಿಳಿಸಿದ್ದು, ಆದರೆ ಜಿಲ್ಲೆಯಲ್ಲಿ ಸಮೀಕ್ಷೆಯ ಪ್ರಗತಿ ಕುಂಠಿತವಾಗಿದೆ ಎಂದು ಗ್ರಾ.ಪಂ.ಸಿಬಂದಿಗೆ ಒತ್ತಡ ಹೇರಲಾಗುತ್ತಿದೆ ಎಂದು ಮೇಲಾಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಮನವಿ ಸಲ್ಲಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




