ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ
ಕೊಪ್ಪಳ: ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ.
ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್ಆರ್ಎಸ್ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ ದುರ್ದೈವಿ. ವೆಂಕಟೇಶ್ ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಹೀಗೆ ಬಂದವರು ಅವರ ಬೈಕ್ಗೆ ಗುದ್ದಿದ್ದಾರೆ. ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ವೆಂಕಟೇಶ್ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.




