ಉದ್ಯಮಿ ಅಭಿಷೇಕ್ ಗುಪ್ತಾ ಕೊಲೆ: ಹಿಂದೂ ಮಹಾಸಭಾದ ನಾಯಕಿಯ ಬಂಧನ
ಜೈಪುರ್: ಉತ್ತರ ಪ್ರದೇಶದ ಉದ್ಯಮಿ ಅಭಿಷೇಕ್ ಗುಪ್ತಾ ಅವರ ಕೊಲೆ ಪ್ರಕರಣದಲ್ಲಿ ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಭರತ್ಪುರ ಜಿಲ್ಲೆಯ ಆಗ್ರಾ-ಜೈಪುರ ಹೆದ್ದಾರಿಯ ಲೋಧಾ ಬೈಪಾಸ್ ಬಳಿ ಶುಕ್ರವಾರ ತಡರಾತ್ರಿ ಪಾಂಡೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 26 ರಂದು ಅಲಿಗಢ ನಗರದ ಹೊರವಲಯದಲ್ಲಿ ಬಸ್ ಹತ್ತುತ್ತಿದ್ದಾಗ ಅಭಿಷೇಕ್ ಗುಪ್ತಾ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾ ಅವರ ಪತಿ ಅಶೋಕ್ ಪಾಂಡೆ ಮತ್ತು ಶಾರ್ಪ್ ಶೂಟರ್ ಮೊಹಮ್ಮದ್ ಫಜಲ್ ಮತ್ತು ಆಸಿಫ್ ಎಂಬವರನ್ನು ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ಪೂಜಾ ದಂಪತಿ ಸೂಚನೆಯ ಮೇರೆಗೆ ಹತ್ಯೆ ಮಾಡಿದ್ದಾಗಿ ಶಾರ್ಪ್ ಶೂಟರ್ಗಳು ತಿಳಿಸಿದ್ದರು. ಈ ಮಾಹಿತಿ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.




