ಶಾಲಾ ವಾಹನ, ಬೈಕ್ ನಡುವೆ ಅಪಘಾತ: ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು
ಚಿಕ್ಕಬಳ್ಳಾಪುರ: ಶಾಲಾ ವಾಹನ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಮಕ್ಕಳು ಇಬ್ಬರು ಪುರುಷರು ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ನಡೆದಿದೆ.
ಮೃತರನ್ನು ಬಾಲಾಜಿ(34), ವೆಂಕಟೇಶಪ್ಪ(50), ಹರೀಶ್(12), ಆರ್ಯ(3) ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಮತ್ತೊಂದು ಮಗುವಿಗೆ ಗಂಭೀರ ಗಾಯಗಳಾಗಿವೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮದುವೆಯಲ್ಲಿ ಭಾಗಿಯಾಗಲು ಬೈಕ್ನಲ್ಲಿ ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದೆಡೆ ಎದುರುಗಡೆ ಬಂದ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.
ಪರಿಣಾಮ ಘಟನೆಯಲ್ಲಿ ಐವರ ಪೈಕಿ ನಾಲ್ವರು ಮೃತಪಟ್ಟಿದ್ದು, ಇನ್ನೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಮಗುವಿಗೆ ಬುರುಡುಗುಂಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.




