ಬಿ.ಸಿ ರೋಡ್ ಭೀಕರ ಅಪಘಾತ ಪ್ರಕರಣ-ಒಟ್ಟು ಮೂವರು ಮೃತ್ಯು: ಅವೈಜ್ಞಾನಿಕ ಸರ್ಕಲ್ ನಿರ್ಮಾಣವೇ ಅಪಘಾತಕ್ಕೆ ಕಾರಣ?
ಬಂಟ್ವಾಳ: ಬಿ.ಸಿ ರೋಡಿನ ಸರ್ಕಲ್ ನಲ್ಲಿ ನಡೆದ ಬೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ (75) ಎಂದು ಗುರುತಿಸಲಾಗಿದೆ.
ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದ ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು ಎಂದು ಹೇಳಲಾಗಿದೆ.
ಒಂಬತ್ತು ಮಂದಿಯಲ್ಲಿ ರಮ್ಯಾ ಅವರು ಪೋಲೀಸ್ ಅಧಿಕಾರಿಯೊಬ್ಬರ ಪತ್ನಿ ಎಂದು ಹೇಳಲಾಗಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.
ಮುಂಜಾನೆ ಸುಮಾರು 4.40 ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ ರೋಡಿನ ಎನ್.ಜಿ.ಸರ್ಕಲ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟ್ಟಿದ್ದು ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವೈಜ್ಞಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದು, ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ ಸರ್ಕಲ್ ಗೆ ಪ್ರಥಮ ಬಲಿಯಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




