ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: 65 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಆರೋಪಿಯ ಸೆರೆ
ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 548.31 ಮಿಲಿ ಗ್ರಾಂ ತೂಕದ 65,79,720 ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರದ ಒಳಕಾಡು ನಿವಾಸಿ ಶೈಲಾ ವಿಲ್ಹೆಲ್ ಮೀನಾ ಎಂಬವರು ನ.30ರಂದು ಬೆಳಗ್ಗೆ ಚರ್ಚಿಗೆ ಹೋಗಲು ಚಿನ್ನಾಭರಣ ಇಟ್ಟಿದ್ದ ಬೆಡ್ರೂಂನ ಕಪಾಟು ತೆರೆದಿದ್ದು, ಆಗ ಅದರಲ್ಲಿಟ್ಟಿದ್ದ ಸುಮಾರು 548.31 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್ ಫೋನ್ನ್ನು ಕಳವಾಗಿರುವುದು ಕಂಡು ಬಂತು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಡಿ.2ರಂದು ಉಡುಪಿ ನಗರದ ಕಿನಿಮೂಲ್ಕಿ ಹಿರೇನ್ ಬಾರ್ ಬಳಿ ಬಂಧಿಸಿತು. ಬಳಿಕ ವಿಚಾರಣೆಗೆ ಒಳಪಡಿಸಿದಾಗ ಆತ ಕಳವು ಮಾಡಿದ ಸೊತ್ತುಗಳನ್ನು ಅಜ್ಜರಕಾಡು ಮನೆಯೊಂದರಲ್ಲಿ ಇರಿಸಿರುವುದಾಗಿ ತಿಳಿಸಿದ್ದು, ಅದರಂತೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ದ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





