ಡಿವೈಡರ್ ಗೆ ಢಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಕಾರಿನಲ್ಲಿದ್ದ ಇನ್ಸ್ಪೆಕ್ಟರ್ ಸಜೀವ ದಹನ
ಧಾರವಾಡ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ದುರ್ಘಟನೆ ನಡೆದಿದೆ.
ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಎಂಬುವವರೇ ಘಟನೆಯಲ್ಲಿ ಮೃತಪಟ್ಟಿದ್ದು, ಕಾರು ಕೂಡಾ ಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಸಾಲಿಮಠ ಅವರು ಇಂದು (ಡಿಸೆಂಬರ್ 05) ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ PS ಸಾಲಿಮಠ ಅವರಿಗೆ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ.
ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.





