ವಿಟ್ಲ: ಅಕ್ರಮ ಕೋಳಿ ಅಂಕಕ್ಕೆ ದಾಳಿ, 20 ಕೋಳಿಗಳು ಸ್ವಾಧೀನ ಹಾಗೂ 27 ಜನರ ವಿರುದ್ದ ಪ್ರಕರಣ ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಪ್ರಕರಣ
ವಿಟ್ಲ: ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಹಲವು ಜನರು ಸೇರಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ, ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕೇಪು ಗ್ರಾಮದ ಕೇಪು ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಹಲವಾರು ಜನರು ಗುಂಪು ಸೇರಿಕೊಂಡು ಹಿಂಸಾತ್ಮಕವಾಗಿ ಕೋಳಿ ಅಂಕ ಆಟವಾಡುತ್ತಿರುವುದು ಕಂಡುಬಂದಿದೆ. ಅಲ್ಲಿ ನೆರೆದಿದ್ದ ಜನರಿಗೆ ಅಕ್ರಮ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದರೂ, ಸೇರಿದ್ದ ಜನರು ಸ್ಥಳದಿಂದ ತೆರಳದೇ ನಿಂತುಕೊಂಡಿದ್ದರು. ಅದಲ್ಲದೇ ಸ್ಥಳದಲ್ಲಿ ಹಾಜರಿದ್ದ
ಸಂಜೀವ ಮಠಂದೂರು, ಮುರಳೀಧರ ರೈ , ಸತೀಶ ಕುಂಪಲ
ದಯಾನಂದ ಉಜಿರೆಮಾರು, ಹರಿಪ್ರಸಾದ್ ಯಾದವ್, ಅಶೋಕ ಶೆಟ್ಟಿ ವಿಟ್ಲ , ರಾಜೇಶ್ ಬಾಳೆಕಲ್ಲು ಎಂಬವರುಗಳು ಅಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿರುತ್ತಾರೆ ಎಂದು ಆರೋಪಿಸಲಾಗಿದೆ.
ಮುಂದುವರೆದಂತೆ ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿ (ಬಾಲು)ಗಳನ್ನು ಸ್ವಾಧೀನಪಡಿಸಲಾಗಿದ್ದು, ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದವರು ಸೇರಿ ಒಟ್ಟು 27 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 191/2025, ಕಲಂ: 189(2), 49, 221, 223, 190 BNS 2023 ಮತ್ತು 3, 11 PREVENTION OF CRUELTY TO ANIMALS ACT ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





