SIR ಕುರಿತು ಸಾರ್ವಜನಿಕ ಜಾಗೃತಿ ಅಗತ್ಯ: ಅಡ್ವಕೇಟ್ ಅಶ್ರಫ್ ಅಗ್ನಾಡಿ
ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಅಗ್ನಾಡಿ, SIR ಇಂದಿನ ದಿನಗಳಲ್ಲಿ ಚರ್ಚೆಗೆ ಒಳಪಡುವ ಅತ್ಯಂತ ಪ್ರಮುಖ ವಿಷಯವಾಗಿದ್ದು, ಕೇಂದ್ರ ಸರ್ಕಾರ ಆರಂಭಿಸಿರುವ ಈ ಸಂಪೂರ್ಣ ಪ್ರಕ್ರಿಯೆಯ ಹಿಂದೆ ಒಂದು ಗಂಭೀರ ಉದ್ದೇಶ ಅಡಗಿರುವಂತೆ ಕಾಣುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಜ್ಜಾಗಿದ್ದುಕೊಂಡು, ಜನಸಾಮಾನ್ಯರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ನಡೆಸಬೇಕಾಗಿದೆ. ವಿಶೇಷವಾಗಿ ಮತದಾರರಿಗೆ ಈ ವಿಷಯದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ತಲುಪಿಸುವುದು ಕಾರ್ಯಕರ್ತರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಅತಿಥಿ ಭಾಷಣ ಮಾಡಿದ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಎಸ್. ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರು ವಹಿಸಬೇಕಾದ ಪಾತ್ರದ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಿದರು. ಮನೆಮನೆಗೆ ಪಕ್ಷದ ಜನಪರ ಹೋರಾಟಗಳು ಹಾಗೂ ಕಾರ್ಯಕ್ರಮಗಳನ್ನು ತಲುಪಿಸುವುದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುವುದೇ ಚುನಾವಣಾ ಯಶಸ್ಸಿನ ಮೂಲಮಂತ್ರ ಎಂದು ಅವರು ಹೇಳಿದರು.
ಪಕ್ಷದ ತತ್ವಗಳು, ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಸಾಮಾಜಿಕ ನ್ಯಾಯದ ಪರವಾದ ನಿಲುವುಗಳನ್ನು ಜನತೆಗೆ ತಲುಪಿಸಲು ಸಂಘಟಿತ ಪ್ರಯತ್ನ ಅಗತ್ಯವಿದ್ದು, ಪ್ರತಿಯೊಬ್ಬ ಕಾರ್ಯಕರ್ತನು ಶಿಸ್ತಿನಿಂದ ಹಾಗೂ ಸಮರ್ಪಣೆಯಿಂದ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದರು. ಹಲವಾರು ನಾಯಕರು, ಸಮರ್ಪಿತ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳನ್ನು ಹೊಂದಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಕ್ಷದ ಶಕ್ತಿಕೇಂದ್ರವಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.
ನಮ್ಮ ಪಕ್ಷ ರಾಜಕೀಯವನ್ನು ವೃತ್ತಿಯನ್ನಾಗಿಸಿಕೊಂಡ ಪಕ್ಷವಲ್ಲ; ಜನರ ಕಷ್ಟ–ದುಃಖಗಳಿಗೆ ಸ್ಪಂದಿಸುವ, ನ್ಯಾಯ ಮತ್ತು ಸತ್ಯದ ಪರವಾಗಿ ನಿಲ್ಲುವ ಪಕ್ಷವಾಗಿದೆ. ಮನೆಮನೆ ಸಂಪರ್ಕ, ಸಂಘಟಿತ ಪರಿಶ್ರಮ ಹಾಗೂ ಜನಸಾಮಾನ್ಯರ ವಿಶ್ವಾಸದೊಂದಿಗೆ ಚುನಾವಣೆಯನ್ನು ಎದುರಿಸೋಣ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ವಹಿಸಿಕೊಂಡು ಅಧ್ಯಕ್ಷೀಯ ಭಾಷಣ ಮಾಡಿದರು. ಪ್ರಾಸ್ತಾವಿಕ ಭಾಷಣವನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮೂನಿಷ್ ಅಲಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಂ, ವಿಮ್ ರಾಜ್ಯ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಂ ಕೊಡಂಗೆ, ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಕಲ್ಲಡ್ಕ ಬ್ಲಾಕ್ ಸಮಿತಿ ಅಧ್ಯಕ್ಷರಾದ ಸತ್ತಾರ್ ಕಲ್ಲಡ್ಕ ಹಾಗೂ ಸರಪಾಡಿ ಬ್ಲಾಕ್ ಸಮಿತಿ ಅಧ್ಯಕ್ಷರಾದ ಹೈದರ್ ಕಾವಳಕಟ್ಟೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಸ್ವಾಗತಿಸಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರ ಜೊತೆ ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ ಧನ್ಯವಾದ ಅರ್ಪಿಸಿದರು.




