ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಚಾಮರಾಜನಗರ: ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪ ನಡೆದಿದೆ.
ಮೃತ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಅವರು ಪತಿ ಲೋಕೇಶ್ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಕುಟುಂಬ ಸಂಬಂಧಿತ ವಿಚಾರಗಳಿಂದ ಮನನೊಂದು, ವೆಸ್ಲಿ ಸೇತುವೆ ಮೇಲಿಂದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸುದ್ದಿ ನೀಡಿದ್ದಾರೆ.
ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶವವನ್ನು ನದಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ.




