ಕಾರವಾರ: ಭೀಕರ ಅಪಘಾತದಲ್ಲಿ ಮಂಗಳೂರಿನ ಮುಕೇಶ್ ಕೃಷ್ಣ ಶೆಟ್ಟಿ ಸಾವು
ಕಾರವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಳಲಗಾಂವ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವೆಬ್ ಡೆವಲಪರ್ ಮುಕೇಶ್ ಕೃಷ್ಣ ಶೆಟ್ಟಿ (39) ಅವರು ಸಾವನ್ನಪ್ಪಿದ್ದಾರೆ.
ಮ್ಯಾಕ್ಸ್ ಇನ್ಫೋಟೆಕ್ ಸಂಸ್ಥೆಯ ಸಂಸ್ಥಾಪಕರಾಗಿದ್ದ ಶೆಟ್ಟಿ ಅವರು ಮಾರ್ಚ್ 5 ರಂದು ಕುಂದಾಪುರದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮುಕೇಶ್ ಅವರು ಸೀಟ್ ಬೆಲ್ಟ್ ಧರಿಸಿದ್ದರಿಂದ ಮತ್ತು ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಅವರ ಕೈಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ, ಏರ್ಬ್ಯಾಗ್ ಸರಿಯಾದ ಸಮಯದಲ್ಲಿ ಸರಿಯಾಗಿ ಕೆಲಸ ಮಾಡಿದೆಯೇ ಅಥವಾ ಅದರಲ್ಲಿ ತಾಂತ್ರಿಕ ದೋಷವಿತ್ತೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿವೆ.
ಮೃತ ಮುಕೇಶ್ ಕೃಷ್ಣ ಶೆಟ್ಟಿ ಅವರು ಪತ್ನಿ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಯುವ ಉದ್ಯಮಿಯ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಮತ್ತು ಸ್ನೇಹಿತರು ಕಂಬನಿ ಮಿಡಿದಿದ್ದಾರೆ.




