ಸಂತೆಕಟ್ಟೆ | ಖಾಸಗಿ ಬಸ್ ಢಿಕ್ಕಿ: ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ
ಉಡುಪಿ: ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಗಂಬೀರವಾಗಿ ಗಾಯಗೊಂಡ ಘಟನೆ ಸಂತೆಕಟ್ಟೆಯಲ್ಲಿ ಸಂಭವಿಸಿದೆ.
ಸಂತೆಕಟ್ಟೆಯಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಪ್ರದೇಶದಲ್ಲಿ ಸಂಚಾರದಲ್ಲಿ ಬದಲಾವಣೆ ಉಂಟಾಗಿತ್ತು. ಕುಂದಾಪುರದಿಂದ ಉಡುಪಿ ಕಡೆಗೆ ಹೋಗುವ ವಾಹನಗಳನ್ನು ಸರ್ವಿಸ್ ರಸ್ತೆಗೆ ತಿರುಗಿಸಲಾಗಿದ್ದು, ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುವ ವಾಹನಗಳನ್ನು ಕಾಂಕ್ರೀಟ್ ಮಾಡಿದ ಮುಖ್ಯ ಹೆದ್ದಾರಿಯಲ್ಲಿ ಬಿಡಲಾಯಿತು.
ಕುಂದಾಪುರ ಕಡೆಯಿಂದ ಬರುತ್ತಿದ್ದ ಮಾರುತಿ ಬಲೆನೊ ಕಾರು ಮತ್ತೊಂದು ಕಾರನ್ನು ಓವರ್ ಟೇಕ್ ಮಾಡಲು ಹೋಗಿದೆ.ಯ ಈ ವೇಳೆ ಎದುರಿನಿಂದ ಉಡುಪಿಯಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಎಕ್ಸ್ಪ್ರೆಸ್ ಬಸ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ತೀವ್ರವಾಗಿದ್ದು, ಬಲೆನೊ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




