ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ನಿರಾಕರಣೆ ವಿವಾದ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ಬೆಂಗಳೂರು : ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ನಿರಾಕರಣೆ ವಿವಾದದ ಬೆನ್ನಿಗೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಕೆ .ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರವನ್ನು ಬರೆದಿರುವ ಕೆ.ಅಬ್ದುಲ್ ಜಬ್ಬಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವುದು ನನಗೆ ದೊರೆತ ಗೌರವ ಎಂದು ಹೇಳಿದ್ದಾರೆ.
2023ರ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಮತ್ತು ಅಲ್ಪಸಂಖ್ಯಾತ ಇಲಾಖೆಗೆ ಅಗತ್ಯವಿದ್ದಾಗಲೆಲ್ಲಾ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದ್ದೇನೆ. ನಾನು ಇಡೀ ಕರ್ನಾಟಕ ರಾಜ್ಯವನ್ನು ಪ್ರವಾಸ ಮಾಡಿ ಅಲ್ಪಸಂಖ್ಯಾತರನ್ನು ಒಟ್ಟುಗೂಡಿಸಿದ್ದೇನೆ. ಅಲ್ಪಸಂಖ್ಯಾತ ಮತದಾರರು ಮತ್ತು ಪದಾಧಿಕಾರಿಗಳು ನಮ್ಮ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ ಎಂದು ಜಬ್ಬಾರ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.




