ಟೋಲ್ ಪ್ಲಾಜಾ ಬಳಿ BMW ಕಾರಿನ ಮೇಲೆ ಬಿದ್ದ ರೆಡಿ-ಮಿಕ್ಸ್ ಕಾಂಕ್ರೀಟ್ ವಾಹನ: ಹಿರಿಯ ವಕೀಲ ದಾರುಣವಾಗಿ ಸಾವು
ವಿಜಯವಾಡ: ಎನ್ಟಿಆರ್ ಜಿಲ್ಲೆಯ ಕೀಸರ ಟೋಲ್ ಪ್ಲಾಜಾ ಬಳಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ನ ಹಿರಿಯ ವಕೀಲ ಶ್ರೀನಿವಾಸ ರಾವ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ನಿಯಂತ್ರಣ ತಪ್ಪಿದ 16 ಚಕ್ರಗಳ ಭಾರೀ ಟ್ಯಾಂಕರ್ ಇವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.
ರೆಡಿ-ಮಿಕ್ಸ್ ಕಾಂಕ್ರೀಟ್ ಸಾಗಿಸುತ್ತಿದ್ದ ಟ್ಯಾಂಕರ್ನ ಬ್ರೇಕ್ ವಿಫಲವಾಗಿ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟೋಲ್ ಗೇಟ್ ದಾಟುತ್ತಿದ್ದ ಬಿಎಂಡಬ್ಲ್ಯು ಕಾರಿನ ಮೇಲೆ ಟ್ಯಾಂಕರ್ ಉರುಳಿ ಬಿದ್ದಿದ್ದರಿಂದ, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ವಕೀಲರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಟೋಲ್ ಸಿಬ್ಬಂದಿ, ಕ್ರೇನ್ ಮತ್ತು ಜೆಸಿಬಿ ಯಂತ್ರಗಳ ಸಹಾಯದಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಟ್ಯಾಂಕರ್ ಅನ್ನು ಮೇಲೆತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




