ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: 14 ಮಂದಿ ಮೃತ್ಯು
ಚತ್ತೀಸ್ಗಢ: ಶಕ್ತಿ ಜಿಲ್ಲೆಯ ಸಿಂಘಿತಾರಿ ಗ್ರಾಮದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಗಂಭೀರ ಕೈಗಾರಿಕಾ ದುರಂತಗಳಲ್ಲಿ ಒಂದು ಎಂದು ಪರಿಗಣಿಸಿರುವ ಈ ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡ ಕಾರ್ಮಿರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ನಿಂದ ಟರ್ಬೈನ್ಗೆ ಹೆಚ್ಚಿನ ಒತ್ತಡದ ಉಗಿಯನ್ನು ಸಾಗಿಸುವ ಟ್ಯೂಬ್ ಸ್ಫೋಟಗೊಂಡಿದೆ. ಈ ವೇಳೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದೆ.
ಸುದ್ದಿ ತಿಳಿದ ತಕ್ಷಣ ತುರ್ತು ಪ್ರತಿಕ್ರಿಯೆ ತಂಡಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.




