ಉಡುಪಿ: ಮಾವಿನಕಾಯಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಉಡುಪಿ: ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಹಿಂಭಾಗದಲ್ಲಿ ಮಾವಿನಕಾಯಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಅಲೆವೂರು ಗ್ರಾಮದ ನಿವಾಸಿ ಸದಾನಂದ ದೇವಾಡಿಗ (55) ಮೃತ ದುರ್ದೈವಿ. ಮಾವಿನ ಮರದ ಮೇಲಿಂದ ಹೈಟೆನ್ಶನ್ ವಿದ್ಯುತ್ ತಂತಿ ಹಾದುಹೋಗಿತ್ತು.
ಸದಾನಂದ ಅವರು ಮಾವು ಕೀಳಲು ಬಳಸುತ್ತಿದ್ದ ಕಬ್ಬಿಣದ ನಳಿಕೆಯು ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ್ದರಿಂದ, ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಮಣಿಪಾಲ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಕೆಳಕ್ಕೆ ಇಳಿಸಲು ನೆರವಾದರು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





