ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು
ಚಿಕ್ಕಮಗಳೂರು: ಅತ್ಯಂತ ಕುತೂಹಲ ಕೇರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ನಡೆದಿದ್ದು, ಟಿ.ಡಿ.ರಾಜೇಗೌಡ ಪ್ರತಿಸ್ಫರ್ಧಿ ಡಿ.ಎನ್.ಜೀವರಾಜ್ ವಿರುದ್ಧ ಜಯಗಳಿಸುವ ಮೂಲಕ ಶಾಸಕ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು.
ಮೊಕದ್ದಮೆಯನ್ನು ಕೈಗೆತ್ತಿಕೊಂಡು ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅದರಂತೆ ಶನಿವಾರ ನಗರದ ಐಡಿಎಸ್ಜಿ ಕಾಲೇಜಿನಲ್ಲಿ 2023ರ ವಿಧಾನಸಭೆ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಕೈಗೊಂಡಿತ್ತು. ಶನಿವಾರ ಬೆಳಿಗ್ಗೆಯಿಂದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಸಿದ್ದು, ಅಂಚೆ ಮತಗಳ ಮರು ಎಣಿಕೆಯಲ್ಲಿ ಟಿ.ಡಿ.ರಾಜೇಗೌಡ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
ಇಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಟಿ.ಡಿ.ರಾಜೇಗೌಡ ಈ ಹಿಂದಿಗಿಂತಲೂ ಹೆಚ್ಚುವರಿಯಾಗಿ ಎರಡು ಮತಗಳನ್ನು ಪಡೆದುಕೊಳ್ಳುವ ಮೂಲಕ ಅಂತರವನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ.





