ಹೈಡ್ರಾಮಕ್ಕೆ ತೆರೆ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ
ನವದೆಹಲಿ: 10 ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಯಾಗಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ 102 ಸ್ಥಾನಗಳೊಂದಿಗೆ ಭರ್ಜರಿ ಬಹುಮತ ಪಡೆದಿದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರಲಿಲ್ಲ. ಸಿಎಂ ಗಾದಿಗಾಗಿ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮ ನಿರ್ಧಾರ ಕೈಗೊಳ್ಳಲು ಭಾರೀ ಕಸರತ್ತು ನಡೆಸಿದ ಹೈಕಮಾಂಡ್ ಕೇರಳದ ಕೈ ನಾಯಕರ ಮಾತಿಗೆ ಬೆಲೆ ನೀಡಿ ವಿ.ಡಿ. ಸತೀಶನ್ ಅವರನ್ನೇ ಅಂತಿಮಗೊಳಿಸಿದೆ.
ಯುಡಿಎಫ್ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ವಿ.ಡಿ. ಸತೀಶನ್ ಅವರ ಆಯ್ಕೆಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿತ್ತು.





