ರೇಣುಕಾಸ್ವಮಿ ಕೊಲೆ ಪ್ರಕರಣ: ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ: ಕನಿಷ್ಠ ಒಂದು ವರ್ಷದವರೆಗೆ ಜೈಲೇ ಗತಿ
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್ ಕನಿಷ್ಠ ಒಂದು ವರ್ಷದವರೆಗೆ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠವು ಈ ಆದೇಶ ನೀಡಿದ್ದು, ಮುಂದಿನ ಒಂದು ವರ್ಷದವರೆಗೆ ದರ್ಶನ್ಗೆ ಜಾಮೀನು ನೀಡಲು ನಿರಾಕರಿಸಿದೆ. ಆದರೆ, ವಿಚಾರಣೆಯಲ್ಲಿ ಯಾವುದೇ ಪ್ರಗತಿಯಾಗದಿದ್ದಲ್ಲಿ ಒಂದು ವರ್ಷದ ನಂತರ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಅವಧಿಯಲ್ಲಿ ಬಾಕಿ ಇರುವ ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ನ್ಯಾಯಪೀಠವು ನಿರ್ದೇಶನ ನೀಡಿದೆ.
ಪ್ರಕರಣದ ವಿಚಾರಣೆ ನಿಧಾನವಾಗಿ ನಡೆಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ದಿನನಿತ್ಯದ ಆಧಾರದ ಮೇಲೆ ವಿಚಾರಣೆ ನಡೆಸಲು ಸೂಚಿಸಿದೆ. ಜೈಲು ಸೌಲಭ್ಯಗಳ ಕುರಿತು ಸ್ಪಷ್ಟನೆ ನೀಡಿದ ಪೀಠವು, “ದರ್ಶನ್ಗೆ ರಾಜಾತಿಥ್ಯ ನೀಡಬೇಡಿ ಎಂದರೆ ಜೈಲಿನ ಸೌಲಭ್ಯಗಳನ್ನೇ ನಿರಾಕರಿಸಿ ಎಂದರ್ಥವಲ್ಲ. ಇತರ ವಿಚಾರಣಾಧೀನ ಕೈದಿಗಳಂತೆ ಜೈಲು ನಿಯಮದ ಅನುಸಾರ ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಮತ್ತು ಅವರನ್ನು ಒಂಟಿಯಾಗಿರಿಸುವ ಅಗತ್ಯವಿಲ್ಲ” ಎಂದು ತಿಳಿಸಿದೆ.





