ಉಡುಪಿ | ಮಾದಕ ದ್ರವ್ಯ ಸಾಗಾಟ, ಮಾರಾಟ: ಆರೋಪಿಯ ಬಂಧನ
ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಜಾಲದಲ್ಲಿ ಸಕ್ರಿಯನಾಗಿದ್ದ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣ್ಣಗುಡ್ಡೆ ನಿವಾಸಿ ಅಬ್ದುಲ್ ರೌಫ್ (26) ಎಂಬಾತನನ್ನು ಪೊಲೀಸರು ಮಂಗಳವಾರ (ಮೇ 19) ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ನೀಡಿದ ಸುದೀರ್ಘ ವರದಿಯ ಆಧಾರದ ಮೇಲೆ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು (ಐಜಿಪಿ) ಈ ಕಟ್ಟುನಿಟ್ಟಿನ ಬಂಧನ ಆದೇಶವನ್ನು ಹೊರಡಿಸಿದ್ದಾರೆ.
ಆರೋಪಿ ಅಬ್ದುಲ್ ರೌಫ್ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ತಲಾ ಒಂದು ಪ್ರಕರಣಗಳು ದಾಖಲಾಗಿದ್ದು, ಇವು ಸದ್ಯ ನ್ಯಾಯಾಲಯದ ವಿಚಾರಣೆಯ ಹಂತದಲ್ಲಿವೆ.
ಇದಲ್ಲದೆ, ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಈತನಿಗೆ ಈಗಾಗಲೇ ಶಿಕ್ಷೆಯಾಗಿದೆ. ಸದ್ಯ ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶಿಸಲಾಗಿದೆ.





