May 21, 2026

ಬೆಳ್ತಂಗಡಿ: ಮನೆಯಲ್ಲಿದ್ದ ಹೋರಿ ಹಾಯ್ದು ಯುವಕ ಸಾವು

0
image_editor_output_image-1850004651-1779347015422.jpg

ಬೆಳ್ತಂಗಡಿ: ಮನೆಯಲ್ಲಿದ್ದ ಹೋರಿ ಹಾಯ್ದು ಗಾಯಗೊಂಡು ಆಸ್ಪತ್ರೆ ಸೇರಿದ್ದ ಗೇರುಕಟ್ಟೆಯ ರಸ್ತೆಬದಿ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಮೇ 20) ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಗೇರುಕಟ್ಟೆ ನಿವಾಸಿ ಮೊಹಮ್ಮದ್ ಶರೀಫ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕಳೆದ ಮೇ 14 ರಂದು ಮೊಹಮ್ಮದ್ ಶರೀಫ್ ಅವರು ತಮ್ಮ ಮನೆಯಲ್ಲಿದ್ದಾಗ ಹೋರಿ ಏಕಾಏಕಿ ಹಾಯ್ದು ತೀವ್ರವಾಗಿ ಗಾಯಗೊಳಿಸಿತ್ತು. ಕೂಡಲೇ ಅವರನ್ನು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯ ವೈದ್ಯರು ಗಾಯಾಳುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸದೆ ತೀವ್ರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಆದರೆ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಾ ಹೋಗಿದೆ. ಪರಿಸ್ಥಿತಿ ತೀರಾ ವಿಕೋಪಕ್ಕೆ ತಿರುಗಿದಾಗ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ವೆನ್ಲಾಕ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಚಿಕಿತ್ಸೆಯ ಸಮಯ ಮೀರಿ ಹೋಗಿತ್ತು. ಸುಮಾರು ಆರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಶರೀಫ್, ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಆರೋಪಿಸಿ ಮೃತರ ಸಹೋದರ ನಾಸಿರುದ್ದೀನ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!