ವಿಟ್ಲ: ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನ: ಕರೋಪಾಡಿ ಮತ್ತು ವಿಟ್ಲದ ಇಬ್ಬರ ಬಂಧನ
ವಿಟ್ಲ: ಅಕ್ರಮವಾಗಿ ವನ್ಯಜೀವಿ ಉತ್ಪನ್ನವಾದ ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಬಂಧಿತ ಆರೋಪಿಗಳು.
ವನ್ಯಜೀವಿ ಉತ್ಪನ್ನವಾದ ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಸ್ಕೂಟರ್ ನಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿಗೆ ತೆರಳಿ, ಸಿಬ್ಬಂದಿಗಳ ಸಹಾಯದಿಂದ ಸ್ಕೂಟರನ್ನು ತಡೆದು ನಿಲ್ಲಿಸಿ ವಿಚಾರಿಸಿದ್ದು, ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5.73 ಗ್ರಾಂ ತೂಕದ ವಸ್ತುವನ್ನು ಹಾಜರುಪಡಿಸಿ, ಇದು ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಎಂಬುದಾಗಿ ತಿಳಿಸಿದ್ದಾರೆ.
ಆರೋಪಿಗಳ ಬಳಿಯಿದ್ದ 02 ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 140/2026, ಕಲಂ: 51 THE WILD LIFE (PROTECTION) ACT, 1972, ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.




