ಮುಂಬೈ: ಮಳೆಯ ರೌದ್ರರೂಪ-ಭೂಕುಸಿತ-ಕಟ್ಟಡ ಕುಸಿತ: ಸಂಚಾರ ಸಂಪೂರ್ಣ ಸ್ಥಗಿತ-13 ಮಂದಿ ಮೃತ್ಯು
ಮುಂಬೈ: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ವೇಗ ಪಡೆದುಕೊಂಡಿದ್ದರೂ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮಳೆ ತನ್ನ ರೌದ್ರ ರೂಪ ಪ್ರದರ್ಶಿಸಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನಗರದೆಲ್ಲೆಡೆ ಭೂಕುಸಿತ, ಕಟ್ಟಡ ಕುಸಿತ, ಪ್ರವಾಹ, ಮರ ಉರುಳುವಂತಹ ಸರಣಿ ಅವಘಡಗಳು ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾನುವಾರ ಒಂದೇ ದಿನ ಸಂಭವಿಸಿದ ವಿವಿಧ ದುರಂತಗಳಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂಖುರ್ಡ್ ಪ್ರದೇಶದಲ್ಲಿ ಚಾಲ್ ಮಾದರಿಯ ಕಟ್ಟಡದ ಒಂದು ಭಾಗ ಕುಸಿದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೋಮವಾರವೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ರೈಲು ಹಾಗೂ ರಸ್ತೆ ಸಂಚಾರದ ಮೇಲೆ ತೀವ್ರ ಪರಿಣಾಮ ಬಿದ್ದಿದೆ. ವಿಶೇಷವಾಗಿ ಮುಂಬೈ–ಪುಣೆ ಎಕ್ಸ್ಪ್ರೆಸ್ವೇ ಭೂಕುಸಿತದಿಂದ ಹಾನಿಗೊಳಗಾಗಿರುವ ಕಾರಣ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇದರಿಂದ ಮುಂಬೈ ಮತ್ತು ಪುಣೆ ನಡುವಿನ ಸಂಪರ್ಕ ಕಡಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ.
ಇನ್ನೊಂದೆಡೆ ನಿರಂತರ ಮಳೆಯಿಂದಾಗಿ ಕರ್ಜತ್–ಲೋನಾವಾಲ ಭೋರ್ ಘಾಟ್ ವಿಭಾಗದಲ್ಲಿ ಸೋಮವಾರ ಬೆಳಗಿನ ಜಾವ ಸುಮಾರು 3.05 ಗಂಟೆಗೆ ಠಾಕೂರ್ವಾಡಿ ಬಳಿ ಮೊದಲ ಭೂಕುಸಿತ ಸಂಭವಿಸಿದೆ. ಅದರ ಕೆಲವೇ ಹೊತ್ತಿನಲ್ಲಿ ಖಂಡಾಲಾ ಮತ್ತು ಮಂಕಿ ಹಿಲ್ ನಡುವೆಯೂ ಮತ್ತೊಂದು ಭೂಕುಸಿತ ಸಂಭವಿಸಿದೆ. ಭೋರ್ ಘಾಟ್ನ ಅಪ್ ಲೈನ್, ಡೌನ್ ಲೈನ್ ಹಾಗೂ ಮಧ್ಯ ರೈಲು ಮಾರ್ಗಗಳ ಮೇಲೂ ಮಣ್ಣು ಮತ್ತು ಕಲ್ಲುಗಳು ಕುಸಿದಿರುವುದರಿಂದ ರೈಲು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಕರ್ಜತ್ ಮತ್ತು ಲೋನಾವಾಲ ನಡುವಿನ ಆಗ್ನೇಯ ಘಾಟ್ ವಿಭಾಗದಲ್ಲಿಯೂ ಮಂಕಿ ಹಿಲ್ ಲೂಪ್ ಕ್ಯಾಬಿನ್ ಸಮೀಪ ಭೂಕುಸಿತ ಸಂಭವಿಸಿರುವುದರಿಂದ ರೈಲ್ವೆ ಇಲಾಖೆ ತುರ್ತು ಕ್ರಮ ಕೈಗೊಂಡಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು ನಗರಕ್ಕೆ ಹಾಗೂ ನಗರದಿಂದ ಸಂಚರಿಸುವ 16 ರೈಲುಗಳ ಸೇವೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದ್ದು, 9 ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಪ್ರಯತ್ನವೂ ನಡೆಯುತ್ತಿದೆ.
ಹವಾಮಾನ ಇಲಾಖೆ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಆಡಳಿತ ಸಾರ್ವಜನಿಕರಿಗೆ ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸೂಚಿಸಿದೆ.
ನೂರಾರು ವಿಮಾನಗಳ ಹಾರಾಟ ವಿಳಂಬ;
ಭಾರೀ ಮಳೆಯಿಂದಾಗಿ ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಹಾಗೂ ರೈಲು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಹಲವೆಡೆ ವಾಹನಗಳು ನೀರಿನಲ್ಲಿ ಸಿಲುಕಿಕೊಂಡಿದ್ದು, ನೂರಾರು ವಿಮಾನಗಳ ಹಾರಾಟ ವಿಳಂಬವಾಗಿದ್ದು, ಕೆಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
‘ವರ್ಕ್ ಫ್ರಂ ಹೋಮ್’ ಗೆ ಸೂಚನೆ ;
ಮಹಾರಾಷ್ಟ್ರ ಸರ್ಕಾರ ಮುಂಬೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಮುಂಬೈ, ಥಾಣೆ ಹಾಗೂ ರಾಯಗಡ್ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದ್ದು, ಮುಂದಿನ 48 ಗಂಟೆಗಳ ಕಾಲ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ಸಾಧ್ಯವಾದರೆ ‘ವರ್ಕ್ ಫ್ರಂ ಹೋಮ್’ ಅನುಸರಿಸುವಂತೆ ಸೂಚಿಸಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಹಾಗೂ ಬಿಎಂಸಿ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.




