ಉಡುಪಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ: ಕಾರ್ಕಳ ಡಿವೈಎಸ್ಪಿ, ಇನ್ಸ್ಪೆಕ್ಟರ್, ಸಹಿತ ಮೂವರು ಅಮಾನತು
ಉಡುಪಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ನಡೆದಿರುವ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್ಪಿ, ಸರ್ಕಲ್ ಇನ್ಸೆಕ್ಟರ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಸೇರಿ ಮೂವರನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ವೈರಲ್ ಆಗಿರುವ ವಿಡಿಯೋಗಳು ಹಾಗೂ ಸಾರ್ವಜನಿಕವಾಗಿ ಕೇಳಿಬಂದಿರುವ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖಾ ವರದಿಯಲ್ಲಿ ಕಂಡುಬಂದ ಅಂಶಗಳ ಆಧಾರದ ಮೇಲೆ ಕಾರ್ಕಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.




