ಎ.ಆರ್. ರೆಹಮಾನ್ ಪುತ್ರ ಸಂಚರಿಸುತ್ತಿದ್ದ ಕಾರು ಅಪಘಾತ
ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪುತ್ರ ಎ.ಆರ್. ಅಮೀನ್ ಹಾಗೂ ಗಾಯಕ ಎ.ಆರ್. ಅಮೀನ್ ಸಂಚರಿಸುತ್ತಿದ್ದ ಕಾರು ಚೆನ್ನೈನ ಗಿಂಡಿ ಪ್ರದೇಶದ ಒಲಿಂಪಿಯಾ ಟೆಕ್ ಪಾರ್ಕ್ ಸಿಗ್ನಲ್ ಬಳಿ ಟ್ಯಾಕ್ಸಿಗೆ ಢಿಕ್ಕಿಯಾಗಿ ಅಪಘಾತಕ್ಕೀಡಾಗಿದೆ.
ಅಮೀನ್ ತಮ್ಮ ಗೆಳೆಯನೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಸೋಮವಾರ (ಆ. 10) ಮುಂಜಾನೆ ಈ ಘಟನೆ ಸಂಭವಿಸಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಇಬ್ಬರೂ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡೂ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎ.ಆರ್. ರೆಹಮಾನ್ ಅಥವಾ ಅಮೀನ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಅಮೀನ್ ಸಹೋದರಿ ಖತೀಜಾ ರೆಹಮಾನ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅಭಿಮಾನಿಗಳ ಕಾಳಜಿ ಮತ್ತು ಸಂದೇಶಗಳಿಗೆ ಧನ್ಯವಾದ ತಿಳಿಸಿದ್ದಾರೆ. ದೇವರ ಕೃಪೆಯಿಂದ ಅಮೀನ್ ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಅವರು ಅಭಿಮಾನಿಗಳಿಗೆ ಅಭಯ ನೀಡಿದ್ದಾರೆ.




