ಬೆಂಗಳೂರು ಜೈಲಿಗೆ ಸಿಸಿಬಿ ಪೊಲೀಸ್ ದಾಳಿ: ಪ್ರಜ್ವಲ್ ರೇವಣ್ಣ ಕೈಯಲ್ಲಿ ಮೊಬೈಲ್ ಪತ್ತೆ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕೇಂದ್ರ ಅಪರಾಧಿ ವಿಭಾಗ (ಸಿಸಿಬಿ)ದ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್ ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಜೈಲಿನಲ್ಲಿ ಪ್ರಭಾವಿ ಹಾಗೂ ಇತರ ಕೈದಿಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಅಪರಾಧಿ ವಿಭಾಗವು(ಸಿಸಿಬಿ) ನಡೆಸಿದ ಐದು ಗಂಟೆಗಳ ಸುದೀರ್ಘ ದಾಳಿ ನಡೆಸಿದೆ. ಈ ವೇಳೆ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಜೈಲು ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಭದ್ರತಾ ಲೋಪದ ಹಿನ್ನೆಲೆಯಲ್ಲಿ ಜೈಲಿನ ಸಹಾಯಕ ಸೂಪರಿಂಟೆಂಡೆಂಟನ್ನು ಅಮಾನತುಗೊಳಿಸಲಾಗಿದ್ದು, ಸೂಪರಿಂಟೆಂಡೆಂಟ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಸಿಸಿಬಿ ದಾಳಿ ನಡೆಸಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರಿರುವ ಬ್ಯಾರಕ್ ನಿಂದ ಒಂದು ಆಂಡ್ರಾಯ್ಡ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಸಿಸಿಬಿ ವತಿಯಿಂದ ಕಾರಾಗೃಹದಲ್ಲಿನ ಪ್ರಮುಖ ಕೈದಿಗಳು ಹಾಗೂ ಇತರ ಕೈದಿಗಳ ಮೇಲೆ ನಡೆಸಲಾದ 4-5 ಗಂಟೆಗಳ ಶೋಧ ಕಾರ್ಯಾಚರಣೆಯ ವೇಳೆ ಬೇರೆ ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.




