ರಾಯಚೂರು: ದಲಿತ ಯುವತಿಯ ಕೊಲೆ ಪ್ರಕರಣ: ಕರ್ತವ್ಯ ಲೋಪ ಆರೋಪದ ಮೇಲೆ ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು
ರಾಯಚೂರು: ಹೊಕ್ರಾಣಿ ಗ್ರಾಮದಲ್ಲಿ ಯುವತಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಹೆಡ್ ಕಾನ್ಸ್ಟೆಬಲ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಬುಧವಾರ ಯುವತಿ ಬಹಿರ್ದೆಸೆಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದು, ಮರುದಿನ ಗ್ರಾಮದ ಬಾವಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಈ ಕುರಿತು ಪೋಷಕರು ಬುಧವಾರ ರಾತ್ರಿ ಸಿರವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಹಾಗೂ ಬೀಟ್ ಸಿಬ್ಬಂದಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿಲ್ಲ ಎಂದು ದಲಿತಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ, ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶುಗಿರಿ ಪ್ರತಿಕ್ರಿಯಿಸಿ, ಕರ್ತವ್ಯ ಲೋಪದ ಆರೋಪದ ಮೇಲೆ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಅಮಾನತುಗೊಂಡ ಸಿಬ್ಬಂದಿಯ ಹೆಸರನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.





