ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಉದ್ದೇಶದಿಂದ ಪಥಸಂಚಲನ: ಬಲವಂತದ ಬಂದ್ ಗೆ ಅವಕಾಶ ಇಲ್ಲ: ಪೊಲೀಸ್ ಇಲಾಖೆ ಸ್ಪಷ್ಟನೆ
ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಇಂದು ಪೊಲೀಸ್ ಪಥಸಂಚಲನ ನಡೆಸಲಾಯಿತು.
ಮೀಲಾದುನ್ನೆಬಿ ಹಿನ್ನೆಲೆಯಲ್ಲಿ ಸಹಜವಾಗಿ ಬಹುತೇಕ ಅಂಗಡಿಗಳು ಮುಚ್ಚಿರುತ್ತವೆ. ಆದರೆ, ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಅವಕಾಶ ನೀಡದಂತೆ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಹಿಂದಿನ ಹಲವು ಪ್ರಕರಣಗಳಲ್ಲಿಯೂ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವವನ್ನು ಪರಿಗಣಿಸದೆ ಪೊಲೀಸರು ನೋಟಿಸ್ ಸೇರಿದಂತೆ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಯಾರಿಗಾದರೂ ಚರ್ಚೆ ಅಥವಾ ಸ್ಪಷ್ಟೀಕರಣ ಅಗತ್ಯವಿದ್ದಲ್ಲಿ ಪೊಲೀಸರೊಂದಿಗೆ ಮುಕ್ತವಾಗಿ ಚರ್ಚಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೀಲಾದುನ್ನೆಬಿ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯು ಬಿಗು ಬಂದೋಬಸ್ತ್ ಏರ್ಪಡಿಸಿದೆ.
ನಗರದಲ್ಲಿ ಬಂದೋಬಸ್ತ್ ಗಾಗಿ ಎಡಿಶನಲ್ ಎಸ್ಪಿ , ಡಿ.ವೈ.ಎಸ್.ಪಿ ಸಹಿತ 8 ಪಿಎಸ್ಐ, 10 ಎಎಸ್ಐ, 50 ಸಿಬ್ಬಂದಿ, 5 ಕೆ.ಎಸ್.ಆರ್.ಪಿ ತುಕಡಿ, 3 ಡಿ.ಎ.ಆರ್ ತುಕಡಿ ಮತ್ತು 1 ಎಸ್.ಎಫ್ ತುಕಡಿಗಳನ್ನು ವ್ಯವಸ್ಥೆಗೊಳಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.





