ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ಯಾಮ್ಸನ್ ಪ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಸೆ.304 (ಜಿಜಿ) ಐಪಿಸಿ ಅನ್ವಯ 4 ವರ್ಷ ಶಿಕ್ಷೆ ಮತ್ತು 10,000 ರೂ. ದಂಡ ಹಾಗೂ ಕಲಂ 201 ಐಪಿಸಿ ಅನ್ವಯ 1 ವರ್ಷ ಶಿಕ್ಷೆ ಮತ್ತು 1,000 ರೂ.ದಂಡವನ್ನು ವಿಧಿಸಲಾಗಿದೆ.
2019ರ ಅಕ್ಟೋಬರ್ 8ರಂದು ಮಧ್ಯಾಹ್ನ 12ಕ್ಕೆ ತನ್ನ ವಾಸದ ಮನೆಯಾದ ಕಂಬಳಪದವು ಎಂಬಲ್ಲಿ ಆರೋಪಿ ಸ್ಯಾಮ್ಸನ್ ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾಳ ಬಳಿ ಮೊಬೈಲ್ ವಿಚಾರವಾಗಿ ಇಬ್ಬರೊಳಗೆ ಮಾತಿನ ಚಕಮಕಿ ನಡೆದಿತ್ತು. ಕೋಪಕೊಂಡಿದ್ದ ಆರೋಪಿ ಸ್ಯಾಮ್ಸನ್ ಸುತ್ತಿಗೆಯಿಂದ ತಂಗಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಬಳಿಕ ಮೃತದೇಹವನ್ನು ಮನೆಯ ಹಿಂಬದಿಯ ಪೊದೆಯಲ್ಲಿ ಬಚ್ಚಿಟ್ಟಿರುವುದಾಗಿ ಆರೋಪಿಸಲಾಗಿತ್ತು.
ಮಗಳು ಕಾಣೆಯಾದ ಬಗ್ಗೆ ಫ್ರಾನ್ಸಿಸ್ ಕುಟಿನ್ಹಾ ಕೊಣಾಜೆ ಠಾಣೆಗೆ ದೂರು ನೀಡಿದ್ದರು. ಬಳಿಕ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಸೋಮವಾರ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರವಾಗಿ ಜ್ಯೋತಿ ಪ್ರಮೋದ ನಾಯಕ್ ವಾದಿಸಿದ್ದರು.





