September 4, 2026

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಪ್ರಕರಣ: ಮಂಡ್ಯ ಮೂಲದ ಇಬ್ಬರ ಬಂಧನ

0
image_editor_output_image48726838-1788510518993

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಮೀಪ ಬೊಲೆರೋ ಪಿಕಪ್ ವಾಹನ ಹಾಗೂ ಮೂವರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ.

ಪೊಲೀಸರನ್ನು ಕಂಡು ಅವರು ಪರಾರಿಯಾಗಲು ಯತ್ನಿಸಿದಾಗ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಮತ್ತು ಮುತ್ತು (28) ಎಂದು ಗುರುತಿಸಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ಕ್ಯಾನ್‌ನಲ್ಲಿ ತುಂಬಿಸಲಾಗಿದ್ದ ಸುಮಾರು 20 ಲೀಟರ್ ಡೀಸೆಲ್, ಖಾಲಿ ಕ್ಯಾನ್‌ಗಳು, ಡೀಸೆಲ್ ಕಳವಿಗೆ ಬಳಸುತ್ತಿದ್ದ ರಬ್ಬರ್ ಪೈಪ್ ಹಾಗೂ ಇತರೆ ಸೊತ್ತುಗಳನ್ನು ಕೃತ್ಯಕ್ಕೆ ಬಳಸಿದ ಪಿಕಪ್ ವಾಹನದೊಂದಿಗೆ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 118/2026, ಕಲಂ 35(1)(ಡಿ) ಬಿ.ಎನ್.ಎಸ್.ಎಸ್. 2023 ಹಾಗೂ 303(2) ಬಿ.ಎನ್.ಎಸ್. 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!