ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನಕ್ಕೆ ಅನುಮೋದನೆ: ಸಿ.ಎಂ
ಮಂಗಳೂರು: ರಾಜ್ಯ ಸಚಿವ ಸಂಪುಟವು ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದ್ದು, ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಅನುಮೋದನೆ ದೊರೆತಿದೆ.
ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟ ಸಮ್ಮತಿ ಸೂಚಿಸಿದೆ ಎಂದು ತಿಳಿಸಿದರು.
“ಹಿಂದಿನ ಸರ್ಕಾರಗಳು ಈ ನಿರ್ಧಾರವನ್ನು ಯಾಕೆ ಕೈಗೊಂಡಿಲ್ಲ ಎಂಬ ಪ್ರಶ್ನೆ ಮಾಡುವುದಿಲ್ಲ. ನಮ್ಮ ಸರ್ಕಾರಕ್ಕೆ ಈ ವಿಷಯದಲ್ಲಿ ಸ್ಪಷ್ಟ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿಗೆ ಸಂಬಂಧಿಸಿದ ವಿಚಾರಗಳ ಮೇಲೆ ಕೆಲಸ ಮಾಡುತ್ತೇವೆ,” ಎಂದು ಸಿಎಂ ಹೇಳಿದರು.
ಇದೇ ವೇಳೆ ಯು.ಟಿ. ಖಾದರ್ ಅವರ ಪಾತ್ರವನ್ನು ಸ್ಮರಿಸಿದ ಸಿಎಂ, “ಸ್ಪೀಕರ್ ಆದ ಬಳಿಕ ಅವರು ಮೊದಲ ಬಾರಿಗೆ ತುಳು ಭಾಷೆಯ ವಿಷಯವನ್ನೇ ಪ್ರಸ್ತಾಪಿಸಿದ್ದರು. ಅವರೊಬ್ಬರಿಗೆ ಮಾತ್ರವಲ್ಲ, ತುಳುವಿಗೆ ಅಧಿಕೃತ ಸ್ಥಾನಮಾನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಿದ ಎಲ್ಲರಿಗೂ ಅಭಿನಂದನೆಗಳು,” ಎಂದು ಹೇಳಿದರು.





