ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ
ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ್ದ ಆರೋಪದಡಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಸಕ್ಕರೆ– ಜವಳಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಲಾಗಿದೆ.
ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹುಣಸಿಕಟ್ಟಿ ಬಳಿಯಲ್ಲಿ ಕ್ವಾರಿ ನಡೆಸಲು ರುದ್ರಪ್ಪ ಲಮಾಣಿ ಅವರು ಹಲವು ವರ್ಷಗಳ ಹಿಂದೆಯೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿದ್ದಾರೆ. ಅದೇ ಜಾಗದಲ್ಲಿ ಕ್ವಾರಿಯನ್ನೂ ನಡೆಸುತ್ತಿದ್ದಾರೆ.
ಇದೇ ಕ್ವಾರಿಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ ಪರವಾನಗಿ ನಿಯಮ ಉಲ್ಲಂಘಿಸಿರುವುದನ್ನು ದಾಖಲೆ ಸಮೇತ ಪತ್ತೆ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ರುದ್ರಪ್ಪ ಲಮಾಣಿ ಅವರಿಗೆ ನೋಟಿಸ್ ನೀಡಿದ್ದಾರೆ.
ಆರು ತಿಂಗಳ ಒಳಗಾಗಿ, ಸುಮಾರು ₹ 3 ಕೋಟಿ ದಂಡವನ್ನು ಪಾವತಿಸಬೇಕು ಎಂದು ಸೂಚಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಕಲ್ಲು ಕ್ವಾರಿ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಈ ಪಟ್ಟಿಯಲ್ಲಿ ಸಚಿವ ರುದ್ರಪ್ಪ ಲಮಾಣಿ ಅವರ ಕಲ್ಲು ಕ್ವಾರಿಯೂ ಸೇರಿದೆ.




