ದೆಹಲಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ:
ವಾರಾಂತ್ಯ ಕರ್ಫ್ಯೂ ಜಾರಿ
ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಪರಿಗಣಿಸಿ ವಾರಾಂತ್ಯದ ದಿನಗಳಲ್ಲಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ತಿಳಿಸಿದ್ದಾರೆ.
ತುರ್ತು ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಮನೆಗಳಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗುವುದು. ಖಾಸಗಿ ಕಚೇರಿಗಳು ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.
ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಸಭೆ ನಡೆಸಿದ ಬಳಿಕ ವರ್ಚುವಲ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಸೋಡಿಯಾ, ‘ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಯಲ್ಲಿರಲಿದೆ. ತೀರ ಅಗತ್ಯವಿದ್ದರೆ ಮಾತ್ರವೇ ಮನೆಗಳಿಂದ ಹೊರಬರಬೇಕು ಎಂದು ಜನರಿಗೆ ಮನವಿ ಮಾಡುತ್ತೇವೆ’ ಎಂದಿದ್ದಾರೆ.




