ಕವಿ, ನಾಟಕಕಾರ, ಕನ್ನಡ ಪರ ಹೋರಾಟಗಾರ ಚಂದ್ರಶೇಖರ ಪಾಟೀಲ ನಿಧನ
ಬೆಂಗಳೂರು: ಕವಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಎಂದೇ ಪ್ರಸಿದ್ದರಾಗಿದ್ದ ಚಂದ್ರಶೇಖರ ಪಾಟೀಲ (83) ಅವರು ಇಂದು ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರಶೇಖರ ಪಾಟೀಲ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಚಂದ್ರಶೇಖರ ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು.
ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಇಂಗ್ಲಿಷ್ ಎಂ.ಎ. ಪದವಿ ಗಳಿಸಿದ್ದರಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾ ಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮಾ ಪಡೆದರು.




