ಉಪ್ಪಿನಂಗಡಿ: ತಲವಾರು ದಾಳಿ, ಕೊಲೆ ಯತ್ನ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿಸೆಂಬರ್ 14ರಂದು ನಡೆದ ಪ್ರತಿಭಟನೆಯ ಸಂದರ್ಭ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಪ್ರಸನ್ನಕುಮಾರ್ ಅವರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಸೇರಿದಂತೆ ಇನ್ನಿತರ ಕೃತ್ಯಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಬೋರುಗುಡ್ಡೆ ನಿವಾಸಿ ಮಹಮ್ಮದ್ ಹನೀಫ್ ಬಂಧಿತ ಆರೋಪಿ.
ಆರೋಪಿಯನ್ನು ಮಂಗಳವಾರ ಮಡಂತ್ಯಾರು ಪಂಚಾಯತ್ ಕಚೇರಿ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಒಮ್ಮೆ ೫ ಮಂದಿಯನ್ನು ಬಳಿಕ ಇಬ್ಬರನ್ನು ಬಂಧಿಸಲಾಗಿತ್ತು. ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕೃತ್ಯಕ್ಕೆ ಸಂಬಂಧಿಸಿ ಅದೇ ದಿನ ಹತ್ತು ಮಂದಿಯನ್ನು ಬಂಧಿಸಲಾಗಿತ್ತು. ಡಿಸೆಂಬರ್ 14 ರ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಒಟ್ಟು 18 ಮಂದಿಯ ಬಂಧನವಾಗಿದ್ದಾರೆ.




